ಕೊಂಬಾರು ಗ್ರಾಮದಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ ಉದ್ಘಾಟಿಸಿದ ಸಚಿವ ಈಶ್ವರಪ್ಪ

 ಕೊಂಬಾರು ಗ್ರಾಮದಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ ಉದ್ಘಾಟಿಸಿದ ಸಚಿವ ಈಶ್ವರಪ್ಪ
Share this post

ಗ್ರಾಮ ವಾಸ್ತವ್ಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಸಚಿವ ಈಶ್ವರಪ್ಪ

ಕೊಂಬಾರು, ಜನವರಿ, 31, 2021: ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರಪ್ಪ, ಇಂತಹಾ ಪ್ರಯತ್ನ ಇತರ ಜಿಲ್ಲೆಗಳಲ್ಲಿ ಕೂಡಾ ನಡೆಯಲಿ ಎಂದು ಆಶಿಸಿದರು.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಕಡಬ ತಾಲೂಕು ಪತ್ರಕರ್ತರ ಸಂಘದ ಆಶ್ರಯದಲ್ಲಿ ಕಡಬ ತಾಲೂಕಿನ ಕೊಂಬಾರಿನಲ್ಲಿ ಭಾನುವಾರ ನಡೆದ ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ತೆಂಗಿನ ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿ ಮಾತನಾಡಿದರು.

“ಕುಟುಂಬದ ರೀತಿಯಲ್ಲಿ ಗ್ರಾಮಸ್ಥರನ್ನು ಸೇರಿಸಿ ಅಭಿವೃದ್ಧಿಗೆ ಪೂರಕವಾದ ಈ ಗ್ರಾಮ ವಾಸ್ತವ್ಯ ರಾಜ್ಯಕ್ಕೆ ಮಾದರಿಯಾಗಿದೆ. ಈ ಗ್ರಾಮ ವಾಸ್ತವ್ಯ ಎಲ್ಲಾ ಜಿಲ್ಲೆಗಳಲ್ಲಿ ನಡೆಯುವಂತಾಗಲಿ. ಈ ಕಾರ್ಯಕ್ರಮ ನನ್ನ ಕಣ್ಣು ತೆರೆಸಿದೆ. ಇದರಿಂದ ಗ್ರಾಮಗಳ ಸಮಸ್ಯೆಗಳು ಬಗೆ ಹರಿಯಲಿದೆ. ಇಲಾಖೆಗಳು ಚುರುಕು ಪಡೆಯುತ್ತವೆ,” ಎಂದು ಈಶ್ವರಪ್ಪ ಹೇಳಿದರು.

ಕೊಂಬಾರು ಗ್ರಾಮದ ನಾಲ್ಕು ರಸ್ತೆಗಳ ಅಭಿವೃದ್ಧಿ :

ಪತ್ರಕರ್ತರ ಗ್ರಾಮ ವಾಸ್ತವ್ಯ ನಡೆದ ಹಿಂದುಳಿದ ಪ್ರದೇಶವಾದ ಕೊಂಬಾರು ಗ್ರಾಮದ ಜನರ ಬಹು ಬೇಡಿಕೆಯಾದ ನಾಲ್ಕು ರಸ್ತೆಗಳನ್ನು ಅಭಿವೃದ್ಧಿ ಮಾಡುವುದಾಗಿ ಆಶ್ವಾಸನೆ ನೀಡಿದರು.

ಕಳೆದ ವರ್ಷ ಮಡಪ್ಪಾಡಿಯಲ್ಲಿ ನಡೆದ ಗ್ರಾಮ ವಾಸ್ತವ್ಯ ದ ಕೈಪಿಡಿಯನ್ನು ಸಚಿವ ಈಶ್ವರಪ್ಪ ಬಿಡುಗಡೆಗೊಳಿಸಿದರು.

ಬಂದರು, ಮೀನುಗಾರಿಕಾ ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಮಾತನಾಡಿ, ಸುಳ್ಯ ವಿಧಾನಸಭೆ ಕ್ಷೇತ್ರ ಬಹಳಷ್ಟು ಗ್ರಾಮೀಣ ಭಾಗವನ್ನು ಹೊಂದಿದೆ. ಗ್ರಾಮೀಣ ಭಾಗದಲ್ಲಿ ರಸ್ತೆ ಮತ್ತು ಸೇತುವೆಗಳ ನಿರ್ಮಾಣ ಪ್ರಮುಖ ಬೇಡಿಕೆಯಾಗಿದೆ. ಅನುದಾನದ ಲಭ್ಯತೆ ನೋಡಿಕೊಂಡು ಹಂತ ಹಂತವಾಗಿ ಅಭಿವೃದ್ಧಿ ಕಾರ್ಯ ನಡೆಸಲಾಗುವುದು ಎಂದು ಹೇಳಿದರು.

“ಗ್ರಾಮೀಣ ಭಾಗದ ರಸ್ತೆಗಳನ್ನು ಅಭಿವೃದ್ಧಿ ಪಡಿಸಲು ಸ್ಥಳೀಯ ಅನುದಾನಗಳು ಸಾಕಾಗುವುದಿಲ್ಲ. ಅದಕ್ಕಾಗಿ ಗ್ರಾಮೀಣ ರಸ್ತೆಗಳನ್ನು ಲೋಕೋಪಯೋಗಿ ರಸ್ತೆಗಳನ್ನಾಗಿ ಮೇಲ್ದರ್ಜೆಗೆ ಏರಿಸಿ ಹೆಚ್ಚು ಅನುದಾನ ತರಿಸಿ ಸರ್ವಋತು ರಸ್ತೆಗಳನ್ನಾಗಿ ಮಾಡಲು ಕ್ರಮ ವಹಿಸಲಾಗುವುದು,” ಎಂದು ಅವರು ಹೇಳಿದರು.

ಪತ್ರಕರ್ತರ ಗ್ರಾಮ ವಾಸ್ತವ್ಯ ಪರಿಕಲ್ಪನೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜಾಗೃತಿ ಮೂಡಿಸುವ ಕಾಯ್ರಕ್ರಮ ಆಗಲಿದೆ. ಇಂತಹಾ ಕಾರ್ಯಕ್ರಮ ಹೆಚ್ಚು ಹೆಚ್ಚಾಗಿ ನಡೆಯಲಿ ಎಂದು ಶುಭ ಹಾರೈಸಿದರು.

ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಕಡಬ ತಾ.ಪಂ. ಅಧ್ಯಕ್ಷೆ ರಾಜೇಶ್ವರಿ ಕನ್ಯಾಮಂಗಲ, ಉಪಾಧ್ಯಕ್ಷೆ ಜಯಂತಿ ಆರ್ ಗೌಡ, ಜಿ.ಪಂ. ಸದಸ್ಯ ಪಿ.ಪಿ. ವರ್ಗೀಸ್, ಪುತ್ತೂರು ಸಹಾಯಕ ಆಯುಕ್ತ ಡಾ. ಯತೀಶ್ ಉಳ್ಳಾಲ್, ಕಡಬ ತಹಶಿಲ್ದಾರ್ ಅನಂತ ಶಂಕರ್, ಮಹಾರಾಷ್ಟ್ರ ಕನ್ನಡಿಗ ಪತ್ರಕರ್ತರ ಸಂಘದ ಅಧ್ಯಕ್ಷ ರೋನ್ಸ್ ಬಂಟ್ವಾಳ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾದ ಆರ್. ರವಿಕುಮಾರ್, ಜಗನ್ನಾಥ ಶೆಟ್ಟಿ ಬಾಳ ಮೊದಲಾದವರು ಉಪಸ್ಥಿತರಿದ್ದರು.
ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಸ್ವಾಗತಿಸಿದರು. ಪತ್ರಕರ್ತ ಲೋಕೇಶ್ ಪೆರ್ಲಂಪಾಡಿ ಕಾರ್ಯಕ್ರಮ ನಿರೂಪಿಸಿದರು.

Subscribe to our newsletter!

Other related posts

error: Content is protected !!