ಮಹಿಳೆ ಮತ್ತು ಮಕ್ಕಳ ಕಾಣೆ ಪ್ರಕರಣ ಬೇಗ ಪತ್ತೆ ಹಚ್ಚಿ: ಜಿಲ್ಲಾಧಿಕಾರಿ ಜಿ.ಜಗದೀಶ್

 ಮಹಿಳೆ ಮತ್ತು ಮಕ್ಕಳ ಕಾಣೆ ಪ್ರಕರಣ ಬೇಗ ಪತ್ತೆ ಹಚ್ಚಿ: ಜಿಲ್ಲಾಧಿಕಾರಿ ಜಿ.ಜಗದೀಶ್
Share this post

ಉಡುಪಿ, ಜು 24, 2021: ಜಿಲ್ಲೆಯಲ್ಲಿ ಮಹಿಳೆ ಮತ್ತು ಮಕ್ಕಳ ಕಾಣೆಯಾಗುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ಆದಷ್ಟು ಶೀಘ್ರದಲ್ಲಿ ಅವರನ್ನು ಪತ್ತೆ ಹಚ್ಚಲು ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆ ಅಧಿಕಾರಿಗಳಿಗೆ  ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚಿಸಿದರು.

ಅವರು ಶುಕ್ರವಾರ, ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ನಡೆದ, ಮಹಿಳಾ ಮತ್ತು  ಮಕ್ಕಳ ಅಭಿವೃದ್ದಿ ಇಲಾಖೆಯ ವಿವಿಧ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ವಿವಿಧ ಕಾರಣಗಳಿಂದ  ಕಾಣೆಯಾಗುವ ಮಹಿಳೆ ಮತ್ತು ಮಕ್ಕಳನ್ನು ಶೀಘ್ರದಲ್ಲಿ ಪತ್ತೆ ಹಚ್ಚದಿದ್ದಲ್ಲಿ ಅವರು ಅಪಾಯಕಾರಿ ಸಮಸ್ಯೆಗಳಿಗೆ ಸಿಲುಕುವ ಸಾಧ್ಯತೆಗಳಿದ್ದು, ತನಿಖಾಧಿಕಾರಿಗಳು ಆದಷ್ಟು ಶೀಘ್ರದಲ್ಲಿ ಇಂತಹ ಪ್ರಕರಣಗಳನ್ನು ಪತ್ತೆ ಹಚ್ಚುವ ಮೂಲಕ , ಅವರ ರಕ್ಷಣೆ ಮಾಡಬೇಕು , ಇಂತಹ ಪ್ರಕರಣಗಳ ಪತ್ತೆಗೆ ಹೆಚ್ಚಿನ ಪೊಲೀಸ್‍ಸಿಬ್ಬಂದಿಗಳನ್ನು ವಿಶೇಷ ಕರ್ತವ್ಯದಲ್ಲಿ ನಿಯೋಜಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದರು.

ಸಾಂತ್ವನ ಕೇಂದ್ರಗಳಲ್ಲಿ ದಾಖಲಾಗುವ ಪ್ರಕರಣಗಳನ್ನು ಶೀಘ್ರದಲ್ಲಿ ಇತ್ಯರ್ಥಗೊಳಿಸಬೇಕು, ನ್ಯಾಯಾಲಯದಲ್ಲಿರುವ ಪ್ರಕರಣಗಳ ಕುರಿತಂತೆ ಗಮನಹರಿಸುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಉಡುಪಿ ಸಾಂತ್ವನ ಕೇಂದ್ರ ಸ್ಥಗಿತಗೊಂಡಿದ್ದು, ಉಡುಪಿಗೆ ಸಂಬಂದಪಟ್ಟ ನೊಂದ ಮಹಿಳೆಯರು ಸಖಿ ಒನ್ ಸ್ಟಾಪ್ ಕೇಂದ್ರದಲ್ಲಿ ಅಗತ್ಯ ನೆರವು ಪಡೆಯುವಂತೆ ತಿಳಿಸಿದರು.

ಉದ್ಯೋಗ ಕ್ಷೇತ್ರದಲ್ಲಿ ಮಹಿಳೆಯರಿಗೆ ತೊಂದರೆಯಾಗದ ಬಗ್ಗೆ ಖಾಸಗಿ ಸೇರಿದಂತೆ ಎಲ್ಲಾ ಕಚೇರಿಗಳಲ್ಲಿ  ಅಂತರಿಕ ದೂರು ಸಮಿತಿ ರಚನೆಯಾಗಿರುವ ಬಗ್ಗೆ ಪರಿಶೀಲಿಸಿ, ನಿಯಮಿತವಾಗಿ ಸಮಿತಿಯ ಸಭೆ ನಡೆಸಿ ವರದಿ ಪಡೆಯಿತಿ ಎಂದು ಮಹಿಳಾ ಮತ್ತು ಮಕ್ಕಳ  ಅಭಿವೃದ್ದಿ ಇಲಾಖೆಗೆ ಸೂಚಿಸಿದರು.

ಜಿಲ್ಲೆಯ ವಲಸೆ ಕಾರ್ಮಿಕರಲ್ಲಿ ಬಾಲ್ಯ ವಿವಾಹ ನಡೆಯುವ ಸಾಧ್ಯತೆಗಳಿದ್ದು ಈ ಬಗ್ಗೆ ನಿಗಾ ವಹಿಸಿ, ಅವರು ವಾಸಿಸುವ ಪ್ರದೇಶದಲ್ಲಿ ಹೆಚ್ಚು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿ. ಶಾಲಾ ಮಕ್ಕಳು 10 ದಿನಗಳಿಗಿಂತ ಹೆಚ್ಚು ಗೈರು ಹಾಜರಾದಲ್ಲಿ , ಅಂತಹ ಮಕ್ಕಳ ಮಾಹಿತಿಯನ್ನು ಶಾಲೆಗಳಿಂಧ ಪಡೆದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಿಗೆ  ಕಳುಹಿಸುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ  ತಿಳಿಸಿದರು.  ಜಿಲ್ಲೆಯಲ್ಲಿರುವ ವಲಸೆ ಕಾರ್ಮಿಕರ ಮೂಲ ಜಿಲ್ಲೆ, ವಿಳಾಸ ಕುರಿತಾದ ಅವರ ಸಮರ್ಪಕ ಮಾಹಿತಿಯನ್ನು ಸಂಗ್ರಹಿಸಲು ಪ್ರಯತ್ನಿಸಿ ಎಂದರು.

ಕುಂದಾಪುರ ಮಹಿಳಾ ಸಾಂತ್ವನ ಕೇಂದ್ರದಲ್ಲಿ 2021 ರ ಜೂನ್ ಅಂತ್ಯದವರೆಗೆ ಬಾಕಿ ಇದ್ದ 63 ಪ್ರಕರಣಗಳಲ್ಲಿ 24 ಪ್ರಕರಣ ಇತ್ಯರ್ಥಗೊಂಡಿದ್ದು, 16 ಸಾಂತ್ವನ ಕೇಂದ್ರದಲ್ಲಿ ಮತ್ತು 23 ನ್ಯಾಯಾಲಯದಲ್ಲಿ ಬಾಕಿ ಇವೆ. ಕಾರ್ಕಳ  ಮಹಿಳಾ ಸಾಂತ್ವನ ಕೇಂದ್ರದಲ್ಲಿ 23 ಪ್ರಕರಣಗಳಲ್ಲಿ  13 ಪ್ರಕರಣ ಇತ್ಯರ್ಥಗೊಂಡಿದ್ದು, 10 ಸಾಂತ್ವನ ಕೇಂದ್ರದಲ್ಲಿ ಬಾಕಿ ಇದೆ.  ವರದಕ್ಷಿಣೆ ನಿಷೇದ ಕಾಯ್ದೆಯಡಿ ಡಿಸೆಂಬರ್ ವರೆಗೆ ಬಾಕಿ ಇದ್ದ 47 ಪ್ರಕರಣಗಳಲ್ಲಿ, 29 ಇತ್ಯರ್ಥಪಡಿಸಲಾಗಿದೆ. ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ ನಿರ್ದೇಶಕ ಶೇಷಪ್ಪ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ, ವಿವಿಧ ಜಿಲ್ಲಾ ಮಟ್ದದ ಅಧಿಕಾರಿಗಳು ಹಾಗೂ ಮಹಿಳೆಯರ ಅಭಿವೃಧ್ದಿಗಾಗಿ ಕಾರ್ಯ ನಿರ್ವಹಿಸುತ್ತಿರುವ ವಿವಿಧ ಸ್ವಯಂ ಸೇವಾ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

Subscribe to our newsletter!

Other related posts

error: Content is protected !!